ಹಾಸನ, ಸೆಪ್ಟೆಂಬರ್ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಪ್ರಧಾನಿ ಮೋದಿ, ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ದುರಂತದ ಬಗ್ಗೆ ಹಾಸನ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ನಿಗಾವಹಿಸಿದ್ದು, ಅಧಿಕಾರಿಗಳು-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳ ಹಸ್ತಾಂತರ ಮಾಡಲಾಗಿದೆ. ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರ ತಂಡದ ರವಾನೆ ಆಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಡಿಹೆಚ್ಒ ಉಸ್ತುವಾರಿ ವಹಿಸಿದ್ದಾರೆ. ಅಗತ್ಯ ವೈದ್ಯರ ತಂಡವನ್ನು ರಚಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಕ್ಯಾಂಟರ್ ಚಾಲಕ ಭುವನ್ ವಿರುದ್ಧ ಎಫ್ಐಆರ್ ದಾಖಲು
ಕ್ಯಾಂಟರ್ ಚಾಲಕ ಭುವನ್ ವಿರುದ್ಧ ಗೊರೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಹಲ್ಲೆಗೊಳಗಾಗಿದ್ದ ಚಾಲಕ ಭುವನ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಬಗ್ಗೆ ಪೊಲೀಸರು ಗೌಪ್ಯತೆ ಕಾಪಾಡಿದ್ದಾರೆ.