ಉಡುಪಿ : ಜಿಲ್ಲೆಯಲ್ಲಿ ದಿನ ಕಳೆದಂತೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆಯ ಪ್ರಸ್ತುತ ಮಾರ್ಚ್ ತಿಂಗಳಲ್ಲೇ 39 ಡಿಗ್ರಿ ಸೆಲ್ಸಿಯಶ್ನಷ್ಟು ಉಷ್ಣಾಂಶವಿದೆ. ಮುಂಬರುವ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಉಷ್ಣಾಂಶ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಇದರಿಂದಾಗಿ ಹೀಟ್ವೇವ್ ಸ್ಟ್ರೋಕ್ ಮನುಷ್ಯನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಹೆಚ್ಚು ನೀರು ಕುಡಿಯುವುದು, ವಿಶ್ರಾಂತಿ, ಚಟುವಟಿಕೆಗಳ ಅವಧಿ ಬದಲಾವಣೆ ಸೇರಿದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಕಳೆದ ಸಾಲಿನಲ್ಲಿ ಸಮಸ್ಯೆ ಉಂಟಾದ ಗ್ರಾಮ ಅಥವಾ ವಾರ್ಡ್ಗಳಲ್ಲಿ ಈಗಿನಿಂದಲೇ ಮುಂದೆ ಸಮಸ್ಯೆಗಳಾದಲ್ಲಿ ಕುಡಿಯುವ ನೀರು ಒದಗಿಸಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ತಯಾರಿ ಮಾಡಿಕೊಳ್ಳಬೇಕು ಎಂದ ಅವರು, ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಅಗತ್ಯ ಕ್ರಮವಹಿಸಬೇಕು. ಆಗಿಂದಾಗ್ಗೆ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಸಿಡಿಲು-ಗುಡುಗಿನಿಂದ ಪ್ರಾಣಹಾನಿ ಉಂಟಾಗಿತ್ತು. ಸಿಡಿಲು-ಗುಡುಗು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ, ಸಾವು ನೋವು ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕೆಂದರು. ಹಾಳಾದ ವಿದ್ಯುತ್ ಕಂಬಗಳು, ನೇತಾಡುವ ತಂತಿಗಳ ತೆರವು ಕಾರ್ಯಗಳನ್ನು ಹಾಗೂ ಜಂಗಲ್ ಕ್ಲಿಯರೆನ್ಸ್ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ಯಾವುದೇ ಭಾಗದಲ್ಲಿ ವಿದ್ಯುತ್ ಸರಬರಾಜಿನ ದುರಸ್ತಿಗಾಗಿ ವ್ಯತ್ಯಯ ಉಂಟು ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪ್ರಕಟಣೆಯ ಮೂಲಕ ಮಾಹಿತಿ ನೀಡಬೇಕೆಂದು ಸೂಚನೆ ನೀಡಿದರು.
ರಸ್ತೆ ಬದಿ ಸೇರಿದಂತೆ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅಪಾಯಕಾರಿ ಮರಗಳ ತೆರವು ಕಾರ್ಯಗಳನ್ನು ನಿರ್ಲಕ್ಷ್ಯವಿಲ್ಲದೆ ಕೈಗೊಳ್ಳಬೇಕು. ಮಳೆ ನೀರು ಸರಾಗವಾಗಿ ಹರಿದುಹೋಗಲು ಅನುಕೂಲವಾಗುವಂತೆ ತೋಡು ಹಾಗೂ ಚರಂಡಿಗಳ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ಕುಡಿಯುವ ನೀರಿನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಎಸ್.ಎಫ್.ಸಿ ಯಲ್ಲಿ ಶೇ.50ರಷ್ಟು ಮೀಸಲಿರಿಸಬೇಕು ಎಂದ ಅವರು, ತಾಲೂಕುಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಆಗಿಂದಾಗ್ಗೆ ಸಭೆ ನಡೆಸಿ, ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.
ಬೇಸಿಗೆಯಲ್ಲಿ ಬೆಂಕಿ ಅವಘಡಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು ಇರುವ ಹಿನ್ನೆಲೆ, ಅಗ್ನಿಶಾಮಕ ದಳದವರು ಸದಾ ಸನ್ನದ್ಧರಾಗಿರಬೇಕು. ಅಗ್ನಿ ನಂದಿಸುವ ವಾಹನಗಳ ಕೊರತೆಯಿದ್ದಲ್ಲಿ ಕೂಡಲೆ ಸರಕಾರಕ್ಕೆ ಪತ್ರ ಬರೆದು ಅವುಗಳನ್ನು ತರಿಸುವ ಕಾರ್ಯವಾಗಬೇಕು ಎಂದರು. ನೆರೆಯಿಂದ ತೊಂದರೆ ಉಂಟಾಗುವ ಗ್ರಾಮ ಅಥವಾ ವಾರ್ಡ್ಗಳ ಪ್ರವಾಹ ಪೀಡಿತ ಪ್ರದೇಶಗಳ ನಿರ್ವಹಣೆ ಯೋಜನೆಗಳನ್ನು ತಯಾರಿಸಿ ಇಟ್ಟುಕೊಳ್ಳಬೇಕು ಎಂದ ಅವರು, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸಾಮರ್ಥ್ಯದ ದೃಢೀಕರಣ ಪತ್ರಗಳನ್ನು ಅಭಿಯಂತರಿಂದ ಪಡೆದು, ಸಲ್ಲಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕಳೆದ ಸಾಲಿನಲ್ಲಿ ಗ್ರಾಮೀಣ ಭಾಗದ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆ ಉಂಟಾಗಿತ್ತು. ಈಗಾಗಲೇ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಿಗೆ ಮುಂದಾಗುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಖಾಸಗಿ ಬೋರ್ವೆಲ್ಗಳಿಂದ ನೀರು ಪಡೆಯಲು ಒಪ್ಪಂದ ಮಾಡಿಕೊಳ್ಳುವಂತೆ ಸೂಚನೆ ನೀಡುವುದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದರು.
K