ಉಡುಪಿ: ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯ ಸಂತ್ರಸ್ತರಿಗೆ, ವಿಚ್ಚೇಧನ, ಬಹು ಪತ್ನಿತ್ವ ಸೇರಿದಂತೆ ಮತ್ತಿತರ ಪ್ರಕರಣಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ ನಡೆಸಿ, ಕಾನೂನು ನೆರವುಗಳನ್ನು ಒದಗಿಸಬೇಕು.ಇದರ ಜೊತೆಯಲ್ಲಿಯೇ ಸ್ವ ಉದ್ಯೋಗ ಮಾಡಲು ಉತ್ತೇಜನ ನೀಡಿ, ಆರ್ಥಿಕವಾಗಿ ಸ್ವಾವಲಂಭಿಗಳಾಗಿಸಲು ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ತಾಯಿ ಕಾರ್ಡ್ ಪಡೆದು ಹೆರಿಗೆಯಾದ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಬೇಕು. ಕೆಲವು ಫಲಾನುಭವಿಗಳಿಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಆಗದೆ ಸೌಲಭ್ಯಗಳು ದೊರಕಿರುವುದಿಲ್ಲ. ಇವರಿಗೆ ಅನುಕೂಲವಾಗುವಂತೆ ಕ್ರಮ ವಹಿಸಬೇಕು. ಎರಡನೇ ಮಗುವು ಹೆಣ್ಣು ಮಗುವಾಗಿದಲ್ಲಿ ಅವರು ಸಹ ಈ ಯೋಜನೆಯ ಎರಡನೇ ಕಂತಿನ ಈ ಯೋಜನೆ ಪ್ರಗತಿ ಲಾಭ ಪಡೆಯಬೇಕು. ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.
ಲಿಂಗ ತಾರತಮ್ಯ ಹೋಗಲಾಡಿಸಲು ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡಲು ಜಾರಿಗೆ ತಂದಿರುವ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು, ಜನನ ಸಮಯದಲ್ಲಿ ಲಿಂಗಾನುಪಾತ ಸುಧಾರಿಸಲು ಹೆಣ್ಣು ಮಗುವಿನ ಭ್ರೂಣ ಹತ್ಯೆ ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಎಚ್ಚರವಹಿಸಬೇಕು ಎಂದರು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಜುಲೈ 2024 ರಿಂದ ಜನವರಿಗೆ 2025 ರ ವರೆಗೆ 174 ಪ್ರಕರಣಗಳಾಗಿ, 125 ಪ್ರಕರಣ ಇತ್ಯರ್ಥಗೊಂಡಿದ್ದು, 14 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ 7 ಪ್ರಕರಣಗಳು, ಕಾನೂನು ಸಮಾಲೋಚನೆಯಲ್ಲಿ 15, ಪೊಲೀಸ್ ಠಾಣೆಯಲ್ಲಿ 1 ಹಾಗು ಆಪ್ತ ಸಮಾಲೋಚನೆಯಲ್ಲಿ 12 ಪ್ರಕರಣಗಳು ಬಾಕಿ ಇದ್ದು, ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗಳಿಸಬೇಕು ಎಂದ ಅವರು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಕುರಿತ ಕಾನೂನು ಕ್ರಮಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸ್ತ್ರೀ ಶಕ್ತಿ ಯೋಜನೆಯ ಗುಂಪುಗಳ ಸದಸ್ಯರುಗಳು ಅದಾಯೋತ್ಪನ್ನ ವಿವಿಧ ಚಟುವಟಿಕೆಗಳಾದ, ಕೃಷಿ, ಹೈನುಗಾರಿಕೆ, ಟೈಲರಿಂಗ್, ಸಣ್ಣ ಪ್ರಮಾಣದ ಸಿದ್ದತರಬೇತಿ ನೀಡಿ, ಅವರುಗಳು ಉದ್ಯೋಗ ಹೊಂದಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಪ್ರೋತ್ಸಾಹಿಸಬೇಕು ಎಂದರು.ಮಕ್ಕಳು, ಗರ್ಭಿಣಿಯರು, ಹಾಲುಣಿಸುವ ತಾಯಂದಿರ ಸಮಗ್ರ ಪೌಷ್ಟಿಕಾಂಶ ಮತ್ತು ಆರೋಗ್ಯದ ಅಗತ್ಯತೆಗಳನ್ನು ಪೂರೈಸಲು ಪೋಷಣ್ ಅಭಿಯಾನದ ಅನುಷ್ಠಾನ ಸಮರ್ಪಕವಾಗಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ 1222 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ 1052 ಸ್ವಂತ ಕಟ್ಟಡಗಳಲ್ಲಿ, ಕೆಲವು ಬಾಡಿಗೆ ಕಟ್ಟಡಗಳಲ್ಲಿ, ಶಾಲೆಗಳಲ್ಲಿ ಅಂಗನವಾಡಿ ಕೇಂದ್ರಗಳು ನಡೆಯುತ್ತಿವೆ ಎಂದರು, ಅಂಗನವಾಡಿ ಕೇಂದ್ರಗಳ ಮಕ್ಕಳ ಆರೋಗ್ಯವನ್ನು ಆಗಾಗ ತಪಾಸಣೆ ನಡೆಸಬೇಕು. ಪೌಷ್ಠಿಕಾಂಶ ಆಹಾರ ನೀಡಲು ಆದ್ಯತೆ ನೀಡಬೇಕು. ತೀವ್ರ ಅಪೌಷ್ಠಿಕ ಹಾಗೂ ಸಾಧರಾಣ ಮಕ್ಕಳಿಗೆ ಒಂದೂವರೆ ಪಟ್ಟು ಪೌಷ್ಠಿಕ ಆಹಾರ ನೀಡಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎ.ಎಸ್. ಪಿ ಸಿದ್ಧಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ, ಡಿಡಿಪಿಐ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಹಿಳಾ ಮಂಡಳಿ ಸದಸ್ಯರು, ಸಾಂತ್ವನ ಕೇಂದ್ರದ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

K