

ತುಮಕೂರು,ಆ,10: ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇರುವಂತೆ ಸಹಕಾರಿ ಸೌಲಭ್ಯ ಪಡೆಯುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ತರುವ ಮಸೂದೆ ರೂಪಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. 75ನೇ ಜನ್ಮದಿನಾಚರಣೆ ಅಂಗವಾಗಿ ಹೊರ ತರಲಾಗಿದ್ದ ‘ಸಹಕಾರ ಸಾರ್ವಭೌಮ’ ಕೃತಿಗೆ ಬರಹಗಳನ್ನು ನೀಡಿದ ಲೇಖಕರಿಗೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದ ಅವರು,ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸೌಲಭ್ಯ ಪಡೆಯುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ತರುವ ಮಸೂದೆ ರೂಪಿಸಲಾಗಿದೆ ಎಂದರು.
ಮುಂದಿನ ವಿಧಾನ ಸಭಾ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಕಾಯ್ದೆ ಜಾರಿಗೆ ಪ್ರಯತ್ನಿಸಲಾಗುವುದು ಎಂದರು.
ಸಹಕಾರಿ ಕಾಯಿದೆಗೆ ತಿದ್ದುಪಡಿ ಮಾಡುವುದರಿಂದ ಸಮಾಜದ ಕೆಳಸ್ತರದ ಅಸಹಾಯಕರು, ಅಶಕ್ತರಿಗೆ ಅವಕಾಶ ಸಿಕ್ಕಂತಾಗುತ್ತದೆ. ಇದು ನಮ್ಮ ಸರ್ಕಾರದ ಆಶಯವಾಗಿದೆ ಎಂದರು.



