ಕಾರ್ಕಳ, ಆ,28: ಕ್ಷೇತ್ರ ಪುನರ್ ವಿಂಗಡಣೆ ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡಿಕೊಂಡು ಬರುತ್ತಿರುವ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯದೇ 5 ವರ್ಷಗಳು ಕಳೆದಿದೆ.
ಆದರೂ ಸರಕಾರವು ಮೀಸಲಾತಿ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದೇ ಪರಿಸ್ಥಿತಿ ರಾಜ್ಯದ ಎಲ್ಲಾಗ್ರಾಮ ಪಂಚಾಯತ್ ಗಳಿಗೂ ಬರುವ ಸಾಧ್ಯತೆಯಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಬೆಂಗಳೂರು ಆಡಳಿತ ಮಂಡಳಿ ಸದಸ್ಯ ಸಾಣೂರು ನರಸಿಂಹ ಕಾಮತ್ ಹೇಳಿದ್ದಾರೆ.
ಈ ಹಿಂದೆ ಚುನಾವಣಾ ಆಯೋಗವೇ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಮೀಸಲಾತಿ ನಿಗದಿ ಪಡಿಸುತ್ತಿತ್ತು.ಆದರೆ 2020 ರಲ್ಲಿ ಪಂಚಾಯತ್ ರಾಜ್ ಕಾಯ್ದೆಗೆ ತಂದ ತಿದ್ದುಪಡಿ ಪ್ರಕಾರ ಮೀಸಲಾತಿ ನಿಗದಿ ಪಡಿಸುವ ರಾಜ್ಯ ಚುನಾವಣಾ ಆಯೋಗದ ಅಧಿಕಾರವನ್ನು ಮೊಟಕುಗೊಳಿಸಿ ರಾಜ್ಯ ಸರಕಾರವೇ ನಿಗದಿಪಡಿಸಬೇಕಾಗಿದೆ.
ಈ ವರ್ಷದ ಅಕ್ಟೋಬರ್ ಅಂತ್ಯಕ್ಕೆ ಗ್ರಾಮ ಪಂಚಾಯತ್ ಗಳ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿ ರಾಜ್ಯ ಸರಕಾರವೇ ಚುನಾವಣಾ ಆಯೋಗಕ್ಕೆ ನೀಡಬೇಕು.ಆದರೆ ಸರಕಾರದ ಮಟ್ಟದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದ್ದು ಡಿಸೆಂಬರ್ ಅಥವಾ ಜನವರಿ ಒಳಗಡೆ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕು.
ಸರಕಾರದ ಈಗಿನ ಧೋರಣೆ ಗಮನಿಸಿದರೆ ನಿಗದಿತ ಅವಧಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗಳನ್ನು ನಡೆಸುವ ಇಚ್ಛಾ ಶಕ್ತಿಯನ್ನು ತೋರಿಸದೇ ಉದಾಸೀನ ಪ್ರವೃತ್ತಿಯಿಂದ ಗ್ರಾಮೀಣ ಭಾಗದಲ್ಲಿ ಆಡಳಿತ ವ್ಯವಸ್ಥೆ ಅಧಿಕಾರಿಗಳಕೈಗೆ ಹೋಗಿ ಪ್ರಜಾಪ್ರಭುತ್ವ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬುಡ ಮೇಲು ಮಾಡುವ ಅಪಖ್ಯಾತಿಗೆ ಸರ್ಕಾರ ಒಳಗಾಗಲಿದೆ.
ರಾಜ್ಯ ಸರಕಾರದ ಈ ಪ್ರಜಾತಂತ್ರ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ ವಿರೋಧಿ ಧೋರಣೆಯ ವಿರುದ್ಧ ಎಲ್ಲಾ ಸ್ಥಳೀಯ ಆಡಳಿತ ಪ್ರತಿನಿಧಿಗಳು, ಜನಸಾಮಾನ್ಯರು ಅನಿವಾರ್ಯವಾಗಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಬೆಂಗಳೂರು ಆಡಳಿತ ಮಂಡಳಿ ಸದಸ್ಯ ಸಾಣೂರು ನರಸಿಂಹ ಕಾಮತ್ ಎಚ್ಚರಿಸಿದ್ದಾರೆ.