ಬೆಂಗಳೂರು: ರಾಜ್ಯ ಸರ್ಕಾರ ಶರಣಾಗತರಾಗಲಿರುವ ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಆರು ಜನ ನಕ್ಸಲ್ ನಾಯಕರು ಶರಣಾಗತಿಗೆ ಮುಂದಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಎದುರು ಶರಣಾಗತಿಯಾಗಲು ತಯಾರಾಗಿದ್ದರು. ಆದರೆ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು. ಆದರೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರು ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುಂತಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಳಿ (ರಾಯಚೂರು), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಅವರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.