Share this news

 

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದಿದ್ದಾರೆ.

ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟವಾಗಿ ಸೂಚನೆಗಳನ್ನು ನೀಡಲಾಗಿದೆ. ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರುವಂತೆ ತಿಳಿಸಲಾಗಿದೆ. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡವಳಿಗಳನ್ನು ಕನ್ನಡದಲ್ಲಿ ತಯಾರಿಸಿ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಂತೆ ಈಗಾಗಲೇ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ಸೂಚಿಸಲಾಗಿದೆ.

ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದಿರುವುದನ್ನು ಗಮನಿಸಿದ ಸಿಎಂ, ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ನಿರ್ದೇಶನ ನೀಡಿದ್ದಾರೆ. ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯವಾಗಿದೆ. ಆದುದರಿಂದ ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳಲ್ಲಿ ನೀಡಿರುವ ಸೂಚನೆಗಳನ್ನು ಸರಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸAಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಲಾಗಿದೆ

 

 

 

 

 

 

 

 

Leave a Reply

Your email address will not be published. Required fields are marked *