ಬೆಂಗಳೂರು : ಬಹುಕೋಟಿ ರೂ.ಗಳ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮ ಎಂಬಾತನನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಹೈದರಾಬಾದ್ ನಲ್ಲಿ ಬಂಧಿಸಿದೆ.
ಈತ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ. ಎಲ್ಲಾ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿತ್ತು. ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್ಐಟಿ, ಆತನ ಪತ್ತೆಗೆ ಬಲೆ ಬೀಸಿತ್ತು. ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ ಮಾಡಲಾಗಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.











