ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕಲ್ಲೇಶ್ ಇಡಿ ಅಧಿಕಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಈ ಎಫ್ಐಆರ್ ಗೆ ಇಂದು ಹೈಕೋರ್ಟ್ ತಡೆ ನೀಡಿದೆ.
ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಈ ವೇಳೆ ಇಡಿ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲ ಮಧುಕರ್ ದೇಶಪಾಂಡೆ, ಅರ್ಜಿದಾರರು ಇಡಿ ಅಧಿಕಾರಿಗಳಾಗಿದ್ದಾರೆ, ಅವರು ತಮ್ಮ ಅಧಿಕೃತ ಕರ್ತವ್ಯವನ್ನಷ್ಟೇ ನಿರ್ವಹಿಸಿದ್ದಾರೆ. ಹೀಗಿದ್ದರೂ ಇಡಿ ವಿಚಾರಣೆಗೆ ಹಾಜರಾಗಿದ್ದ ದೂರುದಾರರು, ವಿಚಾರಣೆ ಮುಗಿದ ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಇ.ಡಿ. ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಾಗೂ ಯಾವುದೇ ಪ್ರಾಥಮಿಕ ವಿಚಾರಣೆ ನಡೆಸದೇ ಇ.ಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಗಾಗಿ, ಅರ್ಜಿಯನ್ನು ಕೂಡಲೇ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದ್ದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಇಂದು ವಿಚಾರಣೆಯನ್ನು ಕೈಗೆತ್ತಕೊಂಡಿತ್ತು. ನ್ಯಾಯಾಲಯದಲ್ಲಿ ವಾದ, ಪ್ರತಿವಾದ ಆಲಿಸಿದ ಬಳಿಕ ಹೈಕೋರ್ಟ್ ನ್ಯಾಯಪೀಠವು ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ ಗೆ ತಡೆ ನೀಡಿದೆ.

`